Skip to main content

ನಮ್ಮ ಕೇರಿ

ಊರು ಕೇರಿಯವರು ಅಡಿಕೆ ಕೊಯ್ಲು ಬಂದರೆ ತುಂಬಾ ಬ್ಯೂಸಿ ಆಗಿ ಬಿಡುತ್ತಾರೆ. ಹೀಗೇ ಉಳಿದ ದಿನಗಳಲ್ಲಿ ಬಿಡುವಿದೆ ಎಂಬ ಅರ್ಥ ಈ ಮಾತಿನದ್ದಲ್ಲ. ಅವರು ಯಾವಾಗಲೂ ಪುರುಸೊತ್ತಿಲ್ಲದ ಜೇನಿನಂತೆ ಕೆಲಸ ಮಾಡುವ ಜನ. ಚಳಿ ಆರಂಭ ಆಗ್ತಾ ಇದ್ಹಾಗೆ ಅಡಿಕೆ ಕೊಯ್ಲು ಶುರುವಾಗಿ ಬಿಡುತ್ತೆ. ಆಗ ಹೆಂಗಸರಿಗೂ, ಗಂಡಸರಿಗೂ ಬಿಡುವಿಲ್ಲದ ಕೆಲಸ. 



ನಮ್ಮಲ್ಲಿ ಗಂಡು ಮೇಲೋ ಹೆಣ್ಣು ಮೇಲೋ ಎಂಬ ಮಾತೇ ಬರೋದಿಲ್ಲ. ಎಲ್ಲ ಕೆಲಸಗಳನ್ನು ಎಲ್ಲರೂ ಸಮನಾಗಿ ಮಾಡುತ್ತಾರೆ. ಅಡಿಕೆ ಕುಯ್ಯುವ ಆ ದಿನವನ್ನು ಗಂಡಸರು ನಿಭಾಯಿಸಿದರೆ, ಆಳುಗಳಿಗೆ ಮಜ್ಜಿಗೆ ಬೆಲ್ಲವನ್ನೋ, ಚಹಾವನ್ನು ಮಾಡಿ, ತೆರಿ ಅಡಿಕೆ ಹೆಕ್ಕಿ ಅದೂ ಇದೂ ಅಂತ ಲೆಕ್ಕಕ್ಕೇ ಸಿಗದ ನೂರು ಕೆಲಸವನ್ನು ಹೆಂಗಸರೇ ಮಾಡುತ್ತಾರೆ. ಅಷ್ಟೇ ಯಾಕೆ ಅಡಿಕೆ ಹೋರಲು ಜನ ಸಿಗಲಿಲ್ಲ ಎಂದರೆ ಇವರು ಅದಕ್ಕೂ ಸೈ. 


ಇನ್ನು ಸಂಜೆಯಾಗುತ್ತಿದ್ದಂತೆ ಊಟಕ್ಕೆ ತಯಾರಿ ಆಗೇ ಬಿಡಬೇಕು. ಯಾಕೆಂದರೆ ಮುರಿಯಾಳಿನ ಪ್ರಕಾರ ಒಬ್ಬರ ಮನೆ ಅಡಿಕೆಯನ್ನು ಇನ್ನೊಬ್ಬರು ಸುಲಿಯಬೇಕಲ್ಲ. ಅದೇ ಹಿಂದಿನಿಂದಲೂ ಬಂದ ಪದ್ದತಿ. ಹಾಗೆನ್ನುವುದಕ್ಕಿಂತ ನಮ್ಮ ಕೇರಿಯ ಒಗ್ಗಟ್ಟು ಎನ್ನಬಹುದು. ಏನೇ ಕಾರ್ಯಕ್ರಮ ಇರಲಿ ಅಥವಾ ಹತ್ತು ಜನ ಕೂಡುವ ಶುಭಕಾರ್ಯ ಇರಲಿ ಚಪ್ಪರ ಹಾಕುವುದರಿಂದ ಬಾಳೆಲೆಕೊಯ್ದು, ಬಂದವರಿಗೆ ಬಡಿಸುವವರೆಗೂ ಕೇರಿಯವರೇ ನೋಡಿಕೊಳ್ಳುತ್ತಾರೆ. 

ಕೇರಿಯ ಪ್ರೀತಿಯ ಚಿಕ್ಕಪ್ಪ, ಚಿಕ್ಕಮ್ಮಂದಿರು ಎಲ್ಲಾ ಮಕ್ಕಳಿಗೂ ಅಪ್ಪ, ಅಮ್ಮ ಇದ್ದಂತೆ ನಾವು ಪ್ರತಿಭಾ ಕಾರಂಜಿಗೆ ಹೋದೆವು ಅಂದುಕೊಳ್ಳಿ ಅವರು ಯಾರದ್ದೇ ತಾಯಿ ಆಗಿರಲಿ ನಮ್ಮನ್ನೂ ಅವರ ಮಕ್ಕಳು ಎಂದೇ ಭಾವಿಸಿ ತಯಾರಿ ಮಾಡುತ್ತಾರೆ. ಅರ್ಜೆಂಟಿಗೆ ಹೊಲಿಗೆ ಬೇಕಾದರೆ ಮಾಡಿ ಕೊಡ್ತಾರೆ. ಅಯ್ಯೊ ನಮ್ಮನೆಲಿ ಸದ್ಯ ತುಪ್ಪ ಇಲ್ಲ ಎಂದು ಯಾರಾದರು ಒಬ್ಬರು ಹೇಳಿದರೆ ತುಪ್ಪ ಕೊಡಲು ಹತ್ತು ಜನ ಅಮ್ಮಂದಿರು ಸಿದ್ಧರಿರ್ತಾರೆ. 

ಕೇರಿಯ ತುಂಬ ಅಮ್ಮಂದಿರು, ಅವರ ಪ್ರೀತಿ, ಅವರಿಗೂ ನಾವೆಲ್ಲ ಮಕ್ಕಳು. ಯಾರೇ ಕಲಿಯಲು ದೂರ ಹೋಗಿರಲಿ ಅವರು ಊರಿಗೆ ಬಂದರೆಂದರೆ ಎಲ್ಲರೂ ನಮ್ಮನೆಗೆ ಬಾ ಎಂದು ಅಕ್ಕರೆಯಿಂದ ಕರೆಯುವವರೇ ಆಗಿರುತ್ತಾರೆ. ನಾನು ಇಂದು ರಾತ್ರಿ ಬಸ್ಸಿಗೆ ಹೋಗ್ತೀನಿ ಅಂತ ಹೇಳಿದರೆ ಅವರ ಮನೆಯಲ್ಲಿ ಏನಾದರೂ ವಿಶೇಷ ಮಾಡಿದ್ದರೆ ಅದನ್ನು ಹಾಲು ಡೇರಿ ( ಅದೊಂತರ ವಿವಿಧೋದ್ದೇಶ ಸಂಘ ಇದ್ಹಾಗೆ, ವಸ್ತು ವಿಚಾರಗಳ ವಿನಿಮಯಕ್ಕೆ) ಅಲ್ಲಿಗೆ ಕಳಿಸಿ ಕೊಡ್ತಾರೆ. 


ಇನ್ನು ಶಾಲೆಯಲ್ಲಿ ಪಾಲಕರನ್ನು‌ ಕರೆ ತರಲು ಹೇಳಿದರೆ ಕೆಲವು ಬಾರಿ ನನ್ನ ದೊಡ್ಡಪ್ಪ ಸಿಗ್ನೇಚರ್ ಮಾಡಿದ್ದೂ ಇದೆ. ನಮ್ಮ ಕೇರಿಯ ಒಗ್ಗಟ್ಟಿಗೆ ಯಾರ ದೃಷ್ಟಿಯೂ ತಾಗದಿರಲಿ ಎಂಬುದೇ ಆಶಯ. ಇನ್ನು ಅಡಿಕೆ ಸೊಲಿಯುವ ಆ ರಾತ್ರಿಗಳ ಕಥೆಯನ್ನು ಕೇಳಲು ಎಷ್ಟು ಮಜವಾಗಿರುತ್ತದೆ ಎಂದರೆ ಯಾವ ಹಾಲಿವುಡ್ ಮೂವಿಗೂ ಆ ಕಥೆಗಳು ಕಮ್ಮಿಯಿಲ್ಲ. ಕಾಮಿಡಿ, ಎಮೋಷನಲ್ ಪ್ರದೀಪಣ್ಣ ಹೇಳುವ ಹಾರರ್ ಕಥೆಗಳು ಆಹಾ! ಒಂದಕ್ಕಿಂತ ಒಂದು ಮಜ. 


ಇದನ್ನೆಲ್ಲಾ ನಿಮಗೆ ಪೇಟೆಯಲ್ಲಿ ಅನುಭವಿಸಲು ಖಂಡಿತ ಸಿಗೋದಿಲ್ಲ. ಇದು ಒಂಥರ ವರ ಎಂದೇ ಹೇಳಬಹುದು. ಯಾಕೆಂದರೆ ಮೊಬೈಲ್, ಇಂಟರ್ನೆಟ್, ಟಿವಿ ಎಂದು ಕಳೆದು ಹೋಗುವ ಈ ದಿನಗಳಲ್ಲಿ ಅಡಿಕೆ ಕೊಯ್ಲು ಎಂದು ನಾಕು ಜನ ಸೇರಿ ಮಾತಾಡುವುದಿದೆಯಲ್ಲ ಅದರ ಮಹತ್ವ ಅಲ್ಲಿ ಹೋಗಿ ಕುಳಿತಾಗಲೇ ಅರ್ಥವಾಗುತ್ತದೆ. 

ನೀವೂ ಈ ದಿನಗಳು ಹೇಗಿರುತ್ತದೆ ಎಂದು ಅನುಭವಿಸಿಯೇ ನೋಡಬೇಕು ಎಂದಾದರೆ ಅಡಿಕೆ ಕೊಯ್ಲಿನಲ್ಲಿ ಊರಿಗೆ ಹೋಗಿ ಬನ್ನಿ, ಸಾಧ್ಯವಾದರೆ ನಾನೂ ಹೋಗುತ್ತೇನೆ

ಮತ್ತೆ ಸಿಗೋಣ...
ಸುಮಾ.ಕಂಚೀಪಾಲ್ 

Comments

  1. Hey I don't know to read Kannada, but I read the English translated version, and it still felt good to read. Very wholesome topic and the pics are good too.

    ReplyDelete
  2. ಚೆ‌ಂದ ಆಯ್ದು ಕೂಸೆ.ನೈಜತೆ ಮತ್ತು ಕೇರಿಯ ಆತ್ಮೀಯತೆ ಕೂಡಿದ್ದು.ಇಂತಹ ದಿನಗಳು ಇನ್ನು ಬಹಳದಿನಗಳು ಇರಲಾರದು.ಎಲ್ಲರೂ ಮುದುಕರಾಗುತ್ತದ್ದಾರೆ.ಯುವಕರು ಬೆಂಗಳೂರಿನತ್ತ ಮುಖ ಮಾಡಿದ್ದಾರೆ.ಇರಲಿ,ಆದಷ್ಟು ದಿನ ಹೀಗೆ ಇರೋಣ.ನೆನಪುಗಳನ್ನು ಮೆಲಕು ಹಾಕಲಾದರೂ ಮುಂದಿನ ದಿನಗಳಲ್ಲಿ ಬೇಕು.

    ReplyDelete

Post a Comment

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಮಳೆಹನಿ

ಮಳೆ ಇದೊಂದೇ ಪದ ಸಾಕು ಅಲ್ವಾ ಮನಸ್ಸಿಗೆ ಖುಷಿ ಕೊಡೋದಕ್ಕೆ, ಇದು ಎಷ್ಟೋ ಜನರ ಹಂಬಲ ಆಗಿರತ್ತೆ. ಪ್ರಕೃತಿನ ಯಾರು ಜೀವಸ್ತಾರೋ ಅವರಿಗೆ ಇದು ಹಬ್ಬ ಅಂತಾನೆ ಹೇಳ್ಬಹುದು. ಎಷ್ಟೋ ಜನ ಈ ಮಳೆ ಯಾಕಾದ್ರೂ ಬಂತಪ್ಪಾ ಅಂತ ಅಂದ್ಕೊಳೋರು ಇರ್ತಾರೆ, ಪ್ರಪಂಚ ಅಂದ್ರೆ ಹಾಗೆ ಅಲ್ವ ಎಲ್ಲ ರೀತಿಯ ಜನರೂ ಇರ್ತಾರೆ. ಇದನ್ನ ನಾನ್ ಬರಿಬೇಕಾದ್ರೆ ನಂಗ್ ಆಗ್ತಾ ಇದ್ಯಲ್ಲ ಆ ಅನುಭವನ ಅನುಭವಿಸಿ ಬರೀತಾ ಇದೀನಿ. ಒಂದ್ಕಡೆ ಹಕ್ಕಿಗಳ ಚಿಲಿಪಿಲಿ, ಇನ್ನೊಂದ್ ಕಡೆ ಕಪ್ಪೆಗಳ ಸದ್ದು, ಮೊದಲನೇ ಸಲ ನೋಡೋರಿಗೆ ಇದು ಕಿರಿಕಿರಿ ಇರಬಹುದು, ಅದೇ ವಾತಾವರಣದಲ್ಲಿ ಇರುವವರಿಗೆ ಅದು ಸಾಮಾನ್ಯ. ನಮ್ಮ ಮನೆ ಇರೋದು ಇದೆ ಪ್ರಕೃತಿಯ ಮಡಿಲಿನಲ್ಲಿ ಸುತ್ತಮುತ್ತ ಬೆಟ್ಟ ,ಮನೆಮುಂದೆ ಹಳ್ಳ,ಗದ್ದೆ,ತೋಟ. ಇದೇ ನಂದೊಂದು ಪುಟ್ಟ ಪ್ರಪಂಚ. ಮಳೆಗಾಲ ಬಂತು ಅಂದ್ರೆ ಗದ್ದೆ ಹೂಡೋದು, ನೆಟ್ಟಿ ಇದೆಲ್ಲ ಎಸ್ಟ್ ಚಂದ ಅಲ್ವಾ? ನಾವು ಹೈಸ್ಕೂಲಿಗೆ ಹೋಗೋವಾಗಿಂದ ಬೇರೆಕಡೆ ಉಳಿದುಕೊಂಡು ಹೋಗ್ಬೇಕಾಗಿತ್ತು. ಆಗ ನಾವು ಮನೆನ ತುಂಬಾ ಮಿಸ್ ಮಾಡ್ಕೋತಾ ಇದ್ವಿ, ಶನಿವಾರ ಯವಾಗಪ್ಪ ಬರತ್ತೆ? ಯಾವಾಗ ಮನೆಗ್ ಹೋಗ್ತೀವಿ? ಅಂತ ಯೋಚನೆ ಆರಂಭವಾಗ್ತಾ ಇತ್ತು. ಎಸ್ಟ್ ಮಜಾ ಅಲ್ವಾ, ಮನೆಯಿಂದ ಹೊರಗಡೆ ಇದ್ದವರಿಗೆ ಮಾತ್ರ ಅದು ಗೊತ್ತಾಗೋದು. ಮಳೆ ತುಂಬಾ ಜೋರಾಯ್ತು ಅಂದ್ರೆ ರಜೆ ಕೊಡ್ತಿದ್ರು ಆಗ ನೋಡ್ಬೇಕು ಮಕ್ಕಳ ಖುಷಿನಾ. ನನ್ ತಮ್ಮ ತಂಗಿ ಎಲ್ಲ ಕುಣ್ದೇಬಿಡ್ತಾ ಇದ್ರು, ಅದನ್ನ ನೋಡಕ್ಕೆ ಒಂತ...

ನಾಲ್ಕು ವರುಷದ ಖುಷಿ

ಜುಲೈ 6, 2021. ಕಂಚೀಪಾಲ್ ಬ್ಲಾಗ್ ಸ್ಪಾಟ್‌ನಲ್ಲಿ ಅಂದು ನಾನು ನನ್ನ ಮೊದಲ ಬರಹ ಪ್ರಕಟಿಸಿದ್ದೆ. ಓದುಗರು ಇಷ್ಟವಾದರೆ ಓದುತ್ತಾರೆ, ಇಲ್ಲವೆ ಪ್ರಯತ್ನ ಜಾರಿಯಲ್ಲಿರಲಿ. ನಾನಂತೂ ಬರಿಲೇಬೇಕು ಎಂದು ನಿರ್ಧಾರ ಮಾಡಿದ್ದೆ. ಆದರೆ ನಿಮ್ಮಿಂದ ನನಗೆ ಸಿಕ್ಕ ಸ್ಪಂದನೆ ಬಹಳ ದೊಡ್ಡದು. ಒಮ್ಮೆ ಓದಿದವರು ಮತ್ತೊಮ್ಮೆ ಓದಿ ಇಷ್ಟವಾದ ಬರಹಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡು ನಾನು ಸಿಕ್ಕಾಗೆಲ್ಲ 'ನೀ ಬರೆದದನ್ನು ಓದಿದೆ, ತುಂಬಾ ಚೆನ್ನಾಗಿತ್ತು. ಹೀಗೆ ಬರಿತಾ ಇರು' ಎಂದು ಪ್ರೋತ್ಸಾಹಿಸಿದವರು ಹಲವರಿದ್ದೀರಿ. ಮನೆ, ಕಾಲೇಜು, ಆಫೀಸ್ ಎಲ್ಲ ಕಡೆಗಳಲ್ಲಿ ಖುಷಿಯಿಂದ ಬರೆದೆ. ಇಂದು ಇದೇ ಅಕ್ಷರಗಳು ನನ್ನ ಬದುಕಿನ ಕೈಹಿಡಿದು ಮುನ್ನಡೆಸುತ್ತಿವೆ. ಮೊದಲ ಉದ್ಯೋಗ ಸಿಕ್ಕಾಗ ಮತ್ತು ನನ್ನ ಮುಂದಿನ ಹೆಜ್ಜೆಗೂ ಇದೇ ಬ್ಲಾಗ್ ಕಾರಣ ಎಂದು ಕೆಲಸ ಕೊಟ್ಟವರೂ ಹೇಳಿದ್ದು ಇನ್ನೊಂದು ಖುಷಿ. ಇಂದಿಗೆ ಈ ಬ್ಲಾಗ್ ಆರಂಭವಾಗಿ 4 ವರ್ಷಗಳು ಸಂದಿವೆ. ಹಲವರು ಸಾಮಾಜಿಕ ಕಾರ್ಯಕ್ರಮ, ಸ್ವ ಉದ್ಯೋಗಗಳಿಗೆ ಸಂಬಂಧಿಸಿದ ಬರಹಗಳನ್ನು ಇದೇ ಬ್ಲಾಗ್ ಮೂಲಕ ಸಂಪರ್ಕಿಸಿ ಬರೆಸಿಕೊಂಡಿದ್ದಾರೆ. ಕೆಲವರಿಗೆ ಉಚಿತವಾಗಿ ಬರೆದುಕೊಟ್ಟರೆ, ಇನ್ನು ಕೆಲವರು ಅವರಾಗೇ ಹಣ ತಲುಪಿಸಿದ್ದೂ ಉಂಟು.  ಈ 4 ವರ್ಷಗಳಲ್ಲಿ ಹತ್ತೊಂಬತ್ತು ಸಾವಿರ ಜನರು ನನ್ನ ಬ್ಲಾಗ್ ಓದಿದ್ದಾರೆ. ಅದರಲ್ಲಿ ನೀವೂ ಒಬ್ಬರು. 21 ಸಾವಿರ ಜನರನ್ನು ಈ ನಾಲ್ಕು ವರ್ಷಗಳಲ್ಲಿ ತಲುಪಬೇಕು ಎಂಬ ಸಂಕಲ್ಪ ಆಗ...