Skip to main content

ನಾಲ್ಕು ವರುಷದ ಖುಷಿ

ಜುಲೈ 6, 2021. ಕಂಚೀಪಾಲ್ ಬ್ಲಾಗ್ ಸ್ಪಾಟ್‌ನಲ್ಲಿ ಅಂದು ನಾನು ನನ್ನ ಮೊದಲ ಬರಹ ಪ್ರಕಟಿಸಿದ್ದೆ. ಓದುಗರು ಇಷ್ಟವಾದರೆ ಓದುತ್ತಾರೆ, ಇಲ್ಲವೆ ಪ್ರಯತ್ನ ಜಾರಿಯಲ್ಲಿರಲಿ. ನಾನಂತೂ ಬರಿಲೇಬೇಕು ಎಂದು ನಿರ್ಧಾರ ಮಾಡಿದ್ದೆ. ಆದರೆ ನಿಮ್ಮಿಂದ ನನಗೆ ಸಿಕ್ಕ ಸ್ಪಂದನೆ ಬಹಳ ದೊಡ್ಡದು. ಒಮ್ಮೆ ಓದಿದವರು ಮತ್ತೊಮ್ಮೆ ಓದಿ ಇಷ್ಟವಾದ ಬರಹಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡು ನಾನು ಸಿಕ್ಕಾಗೆಲ್ಲ 'ನೀ ಬರೆದದನ್ನು ಓದಿದೆ, ತುಂಬಾ ಚೆನ್ನಾಗಿತ್ತು. ಹೀಗೆ ಬರಿತಾ ಇರು' ಎಂದು ಪ್ರೋತ್ಸಾಹಿಸಿದವರು ಹಲವರಿದ್ದೀರಿ. ಮನೆ, ಕಾಲೇಜು, ಆಫೀಸ್ ಎಲ್ಲ ಕಡೆಗಳಲ್ಲಿ ಖುಷಿಯಿಂದ ಬರೆದೆ. ಇಂದು ಇದೇ ಅಕ್ಷರಗಳು ನನ್ನ ಬದುಕಿನ ಕೈಹಿಡಿದು ಮುನ್ನಡೆಸುತ್ತಿವೆ. ಮೊದಲ ಉದ್ಯೋಗ ಸಿಕ್ಕಾಗ ಮತ್ತು ನನ್ನ ಮುಂದಿನ ಹೆಜ್ಜೆಗೂ ಇದೇ ಬ್ಲಾಗ್ ಕಾರಣ ಎಂದು ಕೆಲಸ ಕೊಟ್ಟವರೂ ಹೇಳಿದ್ದು ಇನ್ನೊಂದು ಖುಷಿ.


ಇಂದಿಗೆ ಈ ಬ್ಲಾಗ್ ಆರಂಭವಾಗಿ 4 ವರ್ಷಗಳು ಸಂದಿವೆ. ಹಲವರು ಸಾಮಾಜಿಕ ಕಾರ್ಯಕ್ರಮ, ಸ್ವ ಉದ್ಯೋಗಗಳಿಗೆ ಸಂಬಂಧಿಸಿದ ಬರಹಗಳನ್ನು ಇದೇ ಬ್ಲಾಗ್ ಮೂಲಕ ಸಂಪರ್ಕಿಸಿ ಬರೆಸಿಕೊಂಡಿದ್ದಾರೆ. ಕೆಲವರಿಗೆ ಉಚಿತವಾಗಿ ಬರೆದುಕೊಟ್ಟರೆ, ಇನ್ನು ಕೆಲವರು ಅವರಾಗೇ ಹಣ ತಲುಪಿಸಿದ್ದೂ ಉಂಟು. 

ಈ 4 ವರ್ಷಗಳಲ್ಲಿ ಹತ್ತೊಂಬತ್ತು ಸಾವಿರ ಜನರು ನನ್ನ ಬ್ಲಾಗ್ ಓದಿದ್ದಾರೆ. ಅದರಲ್ಲಿ ನೀವೂ ಒಬ್ಬರು. 21 ಸಾವಿರ ಜನರನ್ನು ಈ ನಾಲ್ಕು ವರ್ಷಗಳಲ್ಲಿ ತಲುಪಬೇಕು ಎಂಬ ಸಂಕಲ್ಪ ಆಗ ನನ್ನಲ್ಲಿತ್ತು. ಆದರೆ ನಾನು ನಿರಂತರವಾಗಿ ಬರೆಯದ ಕಾರಣ ಅಷ್ಟು ಜನರನ್ನು ತಲುಪುವುದು ಸಾಧ್ಯವಾಗಲಿಲ್ಲ. ಆದರೆ ನಿಮ್ಮ ಆಶೀರ್ವಾದ ನಾನು ಬರೆದ ಬರಹಗಳಿಗೆ ಎಂದೂ ಕಡಿಮೆ ಆಗಲಿಲ್ಲ.
ಎಲ್ಲರಿಗೂ ತುಂಬಾ ಧನ್ಯವಾದಗಳು. ಇನ್ನು ಮುಂದೂ ನಿಮ್ಮ ಪ್ರೀತಿ ಹೀಗೆ ಇರಲಿ.

ಈಗ ಈ ಬ್ಲಾಗಿಗೊಂದು ಹೊಸ ರೂಪ ಕೊಡಲಿದ್ದೇನೆ. ಆಸಕ್ತರು ಕಳಿಸುವ, ಈ ಬ್ಲಾಗ್‌ಗೆ ಒಪ್ಪುವಂತಹ ಬರಹಗಳನ್ನು ನಾನು ಪ್ರಕಟಿಸುತ್ತೇನೆ. ನನ್ನ ಜೊತೆ ನನ್ನ ಮನೆಯವರೂ ಇದ್ದಾರೆ. ಇನ್ನು ಮುಂದೆ ಗುರುಗಣೇಶರ ಬರಹಗಳನ್ನೂ ನೀವು ಓದಬಹುದು. 

ನಾನು ವಿದ್ಯಾರ್ಥಿಯಾಗಿದ್ದಾಗ ಆರಂಭಿಸಿದ ಈ ಬ್ಲಾಗ್ ಅಕ್ಷರಗಳಿಂದಲೇ ಬದುಕಿನ ದಾರಿ ತೋರಿಸಿ ಸುಲಲಿತಗೊಳಿಸಿದೆ. ಇಂತಹ ಹತ್ತು ಹಲವು ಪ್ರಯತ್ನ ಜಾರಿಯಲ್ಲಿರಲಿ, ಇರುತ್ತದೆ. 

ವಿದೇಶಿ ಓದುಗರ ಸಂಖ್ಯೆ


ಧನ್ಯವಾದಗಳು.

ಸುಮಾ.ಕಂಚೀಪಾಲ್

Comments

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...