Skip to main content

ಹಳೆ ಲೇಖನಕ್ಕೆ ಪ್ರಕಟಣೆಯ ಭಾಗ್ಯ!

ಅಷ್ಟಕ್ಕೂ ನಾವು ಮದುವೆ ಆಗಿದ್ದೇ ಬರೋಬ್ಬರಿ ಚುನಾವಣೆಯ ಕಾಲಗತಿಯಲ್ಲಿ.  ನಾವು ಅಂದರೆ ಮತ್ಯಾರೂ ಅಲ್ಲ, ನಾನು ಮತ್ತು ಸುಮಾ.  ಇಬ್ಬರೂ ಮಾಧ್ಯಮದಲ್ಲಿ, ಹೇಳಿಕೇಳಿ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವುದು ಮತದಾನ ಮುಗಿದರೂ ನಾಕು ದಿನ ರಜೆ ಹಾಕಲು ಅನುವು ಮಾಡಿರಲಿಲ್ಲ. ಚುನಾವಣೆ ಮುಗಿದು, ಸರ್ಕಾರ- ಮಂತ್ರಿ ಮಂಡಲ ರಚನೆಯೂ ಆಗಿಹೋದ ಮೇಲಾದರೂ ಒಂದು ಕೈ ನೋಡೇಬಿಡೋಣ ಎಂದು ಹೊರಟೆವು. ನಮಗೆ ಬೇಕಿದ್ದು, ಅದಾಗೇ ಕೂಡಿಬಂದದ್ದು ಎಲ್ಲವೂ ಸೇರಿ ಒಂದು ರಾತ್ರಿ ಕಳೆದು ಬೆಳಗು ಕೂಗುವದರಲ್ಲಿ ಒಂದು ಮುತ್ತಿನ ನಗರಿ! 



ನಮ್ಮ ಸಮಯಕ್ಕೆ ರೈಲು, ರೈಲಿನ ಸಮಯಕ್ಕೆ ನಾವು ಸೆಟ್ ಆಗುವುದಿಲ್ಲ ಎಂದು ಅಳೆದು ತೂಗಿ ಕೊನೆಕ್ಷಣದಲ್ಲಿ ಬಸ್ ಮೆಟ್ಟಿಲು ಹತ್ತುವ ನಿರ್ಧಾರ ಮಾಡಿದ್ದಾಯಿತು. ಮೊದಲು ತೆಲಂಗಾಣ ರಾಜ್ಯ ಸಾರಿಗೆ ಸಂಸ್ಥೆ ಟಿಎಸ್ಆರ್‌ಟಿಸಿ ಬಸ್‌ ಪರಿಶೀಲಿಸಲಾಗಿ ಬಸ್‌ಗಳ ಚಿತ್ರಗಳೇ ನಮ್ಮನ್ನು ಭ್ರಮನಿರಸನ ಮಾಡಿದ್ದು ಸುಳ್ಳಲ್ಲ. ತೆಲಂಗಾಣದ ಲಹರಿ ಹೆಸರಿನ ಬಸ್‌ಗಳು ನಮ್ಮ ರಾಜಹಂಸ ಇದ್ದಹಾಗೆ, ಆದರೆ ನಮ್ಮ ಯಲ್ಲಾಪುರದಿಂದ ಕಾರವಾರಕ್ಕೋ, ಹುಬ್ಬಳ್ಳಿಗೋ ಬುರುಬುರುನೇ ತಿರುಗುವ, ಕೊನೆಗೆ ಕೊರೋನಾಕ್ಕಿಂತ ಮೊದಲು ಕಮ್ಮಾಣಿಯೋ ಕೆಳಾಸೆಗಳೆಂಬೋ ಮೂಲೆ ಮೂಲೆಯ ಊರುಗಳಿಗೆ ಓಡುವ ಬಸ್‌ಗಳೇ ಇವಕ್ಕಿಂತ ಚೆನ್ನ. ಆ ಲೆಕ್ಕದಲ್ಲಿ ನಮ್ಮ ಕೆಎಸ್ಆರ್‌ಟಿಸಿ ಎಷ್ಟೋ ಬೆಸ್ಟ್.   ನಮ್ಮನ್ನು ಸುರಕ್ಷಿತವಾಗಿ ತಲುಪಿಸುವ ಹೊಣೆ ಕೆಎಸ್ಆರ್‌ಟಿಸಿಯ ಐರಾವತ ಸೀಟಿನ ಮೇಲೇ ಬಿತ್ತು ಬಿಡಿ.
ಅವಿಭಜಿತ ಆಂಧ್ರಪ್ರದೇಶವು ತೆಲಂಗಾಣವಾಗಿ ಬೇರ್ಪಟ್ಟ ಮೇಲೆ ನಾನು ತೆಲುಗಿನ ನೆಲ ಮೆಟ್ಟುತ್ತಿರುವುದು ಎರಡನೇ ಸಲ. ಕಾರಣ ಅಕ್ಕ, ಭಾವ ಮತ್ತು ಮುದ್ದು ಅಮೋಘವರ್ಷ. ಹಿಂದಿನ ಬಾರಿಯದ್ದು ಕೆವಿ ತಿರುಮಲೇಶರೇ ಅಕ್ಷಯ ಕಾವ್ಯವಾಗಿ ಹರಿಯುತ್ತಿದ್ದ ಕ್ಷಣಗಳ ದಿನಗಳು. ನಂತರ ಬರೆದದ್ದು ಭಾಳ ಕಡಿಮೆ. ಆಗ ಹೈದರಾಬಾದು ತೆಲಂಗಾಣಕ್ಕೂ ಆಂಧ್ರಕ್ಕೂ ಸಮಿಶ್ರ ರಾಜಧಾನಿಯಾಗಿದ್ದರೆ ಈ ಬಾರಿಯ ಹೈದರಾಬಾದಲ್ಲಿ ಆಂಧ್ರಕ್ಕೆ ಜಾಗ ಇರಲಿಲ್ಲ, ಇದಷ್ಟೇ ಹೊಸ ಬದಲಾವಣೆ. ತಿರುಮಲೇಶರಂತೂ ಮುದ್ದಾಂ ನನ್ನಲ್ಲಿ ಎಲ್ಲಿದ್ದರೋ ಅಲ್ಲೇ ಇದ್ದಾರೆ. 

ಮುಂಜಾನೆಯ ಬೆಳಕು ಬಸ್ ಕಿಟಕಿ ಸರಿಸಿಕೊಂಡು ಮೆಲ್ಲಮೆಲ್ಲನೆ ಕಣ್ಣುರೆಪ್ಪೆ ಸೀಳಿ ಓ..ಹೈದರಾಬಾದು ಬಂದೇ ಬಿಡ್ತಾ ಎಂಬ ಪ್ರಶ್ನೆಗೆ ಉತ್ತರ ಹೊತ್ತು ಬಂದಿದ್ದು ತೆಲುಗಿನ ಅನೇಕಾನೇಕ ಬೋರ್ಡುಗಳು. ನಾವು ಎಂಜಿಬಿಎಸ್‌ನಲ್ಲಿ ಬಸ್ ಇಳಿದಂತೆ ಬಂದಿದ್ದ ಬಾವ, ಊರಿಂದ ಕೆಂಪು ಬಸ್ ಹತ್ತಿ ಬಂದಿದ್ದ ಅಪ್ಪ ಬಂದುಮುಟ್ಟಿದ್ದೇ ತಡ, ಹೊರಟಿತು ಸವಾರಿ.

ನೀವು ಬೇಡ ಬೇಡ ಅಂದರೂ ಹೈದರಾಬಾದಿನ ಜೊತೆ ಮನಸ್ಸು ಬೆಂಗಳೂರಿನ ಹೋಲಿಕೆ ಮಾಡಲು ಶುರುಮಾಡುತ್ತದೆ. ಅತ್ತ ಹಳೆ ಹೈದರಾಬಾದಿನಿಂದ ಇತ್ತ ಸಿಕಂದರಾಬಾದಿನವರೆಗೆ ಓಡಾಡುವಾಗ ಸಿಕ್ಕ ಸಿಕ್ಕ ರಸ್ತೆ ಸರ್ಕಲ್ಲುಗಳಲ್ಲಿ ಇಲ್ಲಿ ನಾನಿದ್ದೇನೆ, ಇಲ್ಲಿಯೂ ನಾನಿದ್ದೇನೆ, ಇಲ್ಲಂತೂ ನಾನೇ ಇದ್ದೇನೆ ಎನ್ನುವ ಪ್ರತಿಮೆಗಳು ನಿಮ್ಮನ್ನೇ ಹಿಂಬಾಲಿಸಿ ಹಿಂಬಾಲಿಸಿ ಬರುತ್ತವೆ. ಪ್ರತಿಮಾ ರಾಜಕೀಯಕ್ಕೆ ಸಿಲುಕಿದ ತೆಲುಗು ರಾಜ್ಯದ ಸರ್ಕಲ್ಲುಗಳು ಚಂದ ಅನಿಸುತ್ತ ನಿಧನಿಧಾನವಾಗಿ ಯಾಕಿಷ್ಟೆಲ್ಲ ಪ್ರತಿಮೆಗಳೆಂಬ ಊಹೆ ಹುಟ್ಟಿಸುತ್ತವೆ. ಎನ್‌ಟಿಆರ್‌ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಬಳಕೆಗೆ ಬಂದ ಪ್ರತಿಮೆ ಪ್ರತಿಷ್ಠಾಪನೆಯ ಹುಕಿಯಿಂದ ಹಿಂದಿನ ವರ್ಷ ಚುನಾವಣೆಯ ನಿಮಿತ್ತ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ಗೆ ಒಂದೇ ಒಂದು ಹೈದರಾಬಾದ್ ಪೇಟೆಯಲ್ಲಿ 22,376 ಪ್ರತಿಮೆಗಳ ತಲೆಬೊಂಡಗಳನ್ನು ಮುಸುಕುಧಾರಿಗಳನ್ನಾಗಿ ಮಾಡುವ ಕಷ್ಟ ಕೊಟ್ಟಿತ್ತು ಎಂಬಲ್ಲಿಗೆ ಬಂದುಮುಟ್ಟಿದೆ.  


ಮುಂದಿನ ಭಾಗದಲ್ಲಿ; ತೆಲಂಗಾಣದಲ್ಲಿ ನೆನಪಾಗಿದ್ದು ಕರ್ನಾಟಕದ ವಿಧಾನಸೌಧ!

ಗುರುಗಣೇಶ ಡಬ್ಗುಳಿ
ಚಿತ್ರಗಳೂ ಅವರದ್ದೇ

vaividhya7@gmail.com

Comments

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...