Skip to main content

ಹೂಗಳಿಂದ ತುಂಬಿದ ಬೆಂಗಳೂರು ಬೀದಿಗಳು

ಪ್ರತಿದಿನ ಬೆಳಗ್ಗೆ ರೆಡಿಯಾಗಿ ಆಫೀಸಿಗೆ ಹೊರಡುವಾಗ ತಡವಾಯ್ತು ಎಂಬ ಗಾಬರಿಯೊಟ್ಟಿಗೆ ಹೊರಡುವುದು. ಆದರೆ ಮನೆ ಬಿಟ್ಟು ರಸ್ತೆಗೆ ಕಾಲಿಟ್ಟ ತಕ್ಷಣ ಹಳದಿ ಹೂಗಳ ಹಾಸಿಗೆ ಕಂಡು ಮನ ಕುಣಿಯುತ್ತದೆ. ಸಿಕ್ಕ ಸಿಕ್ಕದ್ದನ್ನೆಲ್ಲಾ ಫೋಟೋ ತೆಗೆಯುತ್ತಾ ಇನ್ನಷ್ಟು ತಡವಾಗಿಬಿಡುತ್ತದೆ. ನನ್ನ ಪಾಲಿಗೆ ಆ ರಸ್ತೆ ಬರಿ ಡಾಂಬರು ರಸ್ತೆಯಲ್ಲ, ಅದು ಹೂವುಗಳ ಹಳದಿ ಹೊದಿಕೆ ಹೊದ್ದ ರಾಜಮಾರ್ಗ. 


ಆ ಹಳದಿ ಹೂಗಳನ್ನು ಕಂಡ ತಕ್ಷಣ ನನ್ನ ಕೈ ತಾನಾಗಿಯೇ ಬ್ಯಾಗ್ ಒಳಗೆ ಹೋಗಿ ಮೊಬೈಲ್ ಹುಡುಕುತ್ತದೆ. ಮೊಬೈಲ್‌ನಲ್ಲಿ ಚಾರ್ಜ್ ಎಷ್ಟಿದೆ? ಸ್ಟೋರೇಜ್ ಫುಲ್ ಆಗಿದೆಯೇ? ಆಫೀಸಿಗೆ ತಡವಾಗುತ್ತಿದೆಯೇ? ಯಾವುದರ ಚಿಂತೆಯೂ ಇಲ್ಲ. ನನ್ನ ಗಡಿಬಿಡಿಯೇನಿದ್ದರೂ ಆ ಹೂವುಗಳನ್ನು ನನ್ನ ಫೋನ್ ಕ್ಯಾಮೆರಾದಲ್ಲಿ ಸೆರೆಹಿಡಿಯುವುದರಲ್ಲೇ ಇರುತ್ತದೆ.  


ಹಾಗೆ ನಾಲ್ಕು ಹೆಜ್ಜೆ ಮುಂದೆ ನಡೆದರೆ ಸಾಕು, ಅಲ್ಲಿ ಮತ್ತೊಂದು ವಿಸ್ಮಯ. ಹಳದಿ ಹೂಗಳ ನಡುವೆ ಅಲ್ಲಲ್ಲಿ ನೀಲಿ ಮಿಶ್ರಿತ ಬಿಳಿ ಮೊಗ್ಗಿನ ರೀತಿಯ ಹೂಗಳು ಕಣ್ಣು ಮಿಟುಕಿಸುತ್ತಾ ನನ್ನನ್ನು ಕರೆಯುತ್ತಿರುತ್ತವೆ. ಅವುಗಳ ಆ ಮುಗ್ಧ ನೋಟಕ್ಕೆ ಮನಸೋತು ಮತ್ತೆ ಅಲ್ಲಿ ಎರಡು ನಿಮಿಷ ನಿಲ್ಲಲೇಬೇಕು. ನಡೆಯುವುದು, ಹೂವು ನೋಡಿ ನಿಲ್ಲುವುದು, ಫೋಟೋ ತೆಗೆಯುವುದು—ಇದೇ ಆಯಿತು ನನ್ನ ನಿತ್ಯದ ಕಾಯಕ. ಆಫೀಸಿಗೆ ಮುಟ್ಟುವುದು ತಡವಾದರೂ ನನ್ನ ಮನಸ್ಸು ಮಾತ್ರ ಆ ಹೂವುಗಳ ಬಣ್ಣದಲ್ಲೇ ಮಿಂದೆದ್ದು ಫ್ರೆಶ್ ಆಗಿರುತ್ತದೆ. 

ಹಾಗೆ ಮೊನ್ನೆಯೊಂದಿನ ರಸ್ತೆಯಲ್ಲಿ ಹೂವಿನ ಬೊಕ್ಕೆ ಬಿಸಾಡಿದ್ದರು. ಛೇ, ಅಷ್ಟು ಸುಂದರವಾದ ಹೂವುಗಳನ್ನು ನನಗಾದರೂ ಕೊಡಬಾರದಿತ್ತೆ ಎಂದೆನಿಸಿತು.

ಹೇಳಿ ಕೇಳಿ ನನ್ನ ಹೆಸರು ಸುಮಾ ನನಗೂ ಸುಮಗಳೆಂದರೆ ಇಷ್ಟ. ಅಂದಹಾಗೆ, ಇವತ್ತಿನ ಆ ಹಳದಿ ಹೂವಿನ ಫೋಟೋ ಮಾತ್ರ ಅದ್ಭುತವಾಗಿ ಬಂದಿದೆ, ವಾಟ್ಸಾಪ್ ಸ್ಟೇಟಸ್ ಹಾಕಲೇಬೇಕು ಎಂದುಕೊಳ್ಳುತ್ತಾ. ಕ್ಯಾಪ್ಶನ್‌ ಬದಲಾಗಿ ಇಷ್ಟುದ್ದ ಬರೆದುಬಿಟ್ಟೆ ನೋಡಿ. ಇಷ್ಟುದ್ದ ಬರೆದ ಮೇಲೆ ಬ್ಲಾಗ್‌ಗೆ ಹಾಕೋದೆ ಆಯ್ತು.

Comments

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಕೊಡೆ ಕೊಂಡು ಹೋದರೆ ಬಾರದ ಮಳೆ

ಹಾಯ್ ಎಲ್ಲ ಅರಾಮಾ? ಮಳೆ ಬಂದ್ರೆ ಸಾಕು, ಒಂದರ ಹಿಂದೆ ಒಂದು ಕಥೆ ಸಹಸ್ರಪದಿಯಂತೆ ಹರಿದುಬರುತ್ತೆ. ಮಳೆಗಾಲದಲ್ಲಿ ನಾನು ಬರೆಯುವ ಬ್ಲಾಗ್ ಸಂಖ್ಯೆ ಹೆಚ್ಚಾಗಬಹುದು. ಗುಡುಗು, ಮಿಂಚು ಮತ್ತು ಮಳೆ ಸದ್ದಿಗೆ ಏನಾದರೂ ಬರೀಬೇಕು ಅನ್ನೋ ಹಂಬಲ ಹೆಚ್ಚು. ಇವತ್ತು ನಾನು ಬೆಂಗಳೂರ್ ಮಳೆ ಮತ್ತೆ, ನಮ್ಮೂರ್ ಮಳೆ ಬಗ್ಗೆ ಬರೀತಾ ಇದ್ದೀನಿ. ಈ ಟಾಪಿಕ್ ಓಕೆನಾ?  ಓಕೆನೆ ಬಿಡಿ, ಸುಮಾ ಬ್ಲಾಗ್ ಬರ್ಯೋದೆ ಅಪರೂಪ ಆಗಿರೋವಾಗ ನೀವ್ ಓದದೆ ಇರಲ್ಲ ಅನ್ನೋ ಭರವಸೆಲೇ ಬರೀತೀನಿ. ಬೆಂಗಳೂರಲ್ಲಿ ಮಳೆ ಬಂದ್ರೆ ನೀರು ಇಂಗೋಕೆ ಜಾಗ ಇಲ್ದೆ ಕೆಲವು ಕಡೆ ಅವಾಂತರ ಆಗೋದು ನಿಜ. ಆದ್ರೆ, ಊರಲ್ಲಿ ಹಾಗಲ್ಲ ನೋಡಿ. ಅಲ್ಲಿ ಸಿಮೆಂಟ್ ರೋಡಿಗಿಂತ ಮಣ್ಣು ರಸ್ತೆಯೇ ಜಾಸ್ತಿ. ನೀರು ಇಂಗುತ್ತೆ. ಸಾಧಾರಣ ಮಳೆ ಬಂದ್ರೆ ಇಬ್ಬನಿ ಬಿದ್ದ ಹಾಗಿರುತ್ತೆ. ಆದ್ರೆ ಬೆಂಗಳೂರಲ್ಲಿ ಸಾಧಾರಣ ಮಳೆ ಬಂದ್ರೂ ಪ್ರವಾಹವೇ ಉಕ್ಕಿ ಬರೋದು. ನಿನ್ನೆ ಆಫೀಸಿಗೆ ಬರೋಕ್ ಆಗ್ದೆ ಇದ್ರೆ ಮನೆಯಿಂದಲೇ ಕೆಲಸ ಮಾಡಿ ಅಂತ 'Work From Home' ಕೊಟ್ಟಿದ್ರು. ಯಾಕಂದ್ರೆ, ಮಳೆ ಬಂದು ಅಲ್ಲಲ್ಲಿ ಮರ ಬಿದ್ದು, ನೀರ್ ತುಂಬಿ ಟ್ರಾಫಿಕ್ ಹೆಚ್ಚಾಗಿತ್ತು. ಆದ್ರೆ ಆಫೀಸಿಗೆ ನಾನ್ ಹೋಗಿದ್ದೆ. ಬೆಂಗಳೂರಿಗೆ ಕೆಲಸಕ್ಕೆ ಅಂತಲೇ ಬಂದಿರೋ ನನ್ ತರದೋರೆಲ್ಲ ಅವತ್ತು ನಗ್ತಾ ಇದ್ರು. "ಇದೂ ಒಂದ್ ಮಳೆನಾ? ಮಳೆ ಅಂದ್ರೆ ನಮ್ಮೂರಲ್ ಬರತ್ತಲ್ಲ, ಅದು" ಅಷ್ಟಂದಿದ್ದೇ ತಡ ಹಳ್ಳಿಯಿಂದ ಬಂದಿದ್ದ ಜನ ಎಲ್ಲ ಸೇರಿ ಒ...